ಆತ್ಮಹತ್ಯೆ ಬ್ಲ್ಯಾಕ್ಮೇಲ್ ಸಹಿಸಲ್ಲ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಸರ್ಕಾರಕ್ಕೆ ಬ್ಲ್ಯಾಕ್ಮೇಲ್ ಮಾಡಬಾರದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ತಮ್ಮ ಕಚೇರಿಯಲ್ಲಿ ಪೂಜೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾರಾದರೂ ಆ ರೀತಿ ಬ್ಲ್ಯಾಕ್ಮೇಲ್ ಮಾಡಿದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
‘ಸರ್ಕಾರ ರೈತರ ಪರವಾಗಿಯೇ ಇದೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿ ಮೀರಿ ಶ್ರಮಿಸುತ್ತಿದೆ. ರೈತರ ಆತ್ಮಹತ್ಯೆಯನ್ನು ಪ್ರೋತ್ಸಾಹಿಸುವುದಿಲ್ಲ’ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ. ಬಹುತೇಕ ಜಲಾಶಯಗಳು ತುಂಬಿವೆ. ಮುಂಜಾಗ್ರತಾ ಕ್ರಮವಾಗಿ ಕಬಿನಿಯಿಂದ ಆರು ಟಿ.ಎಂ.ಸಿ ಅಡಿ ನೀರನ್ನು ಹೊರಬಿಡಲಾಗಿದೆ. ಈ ರೀತಿ ನೀರು ಬಿಟ್ಟಾಗ ಬೆಳೆದು ನಿಂತ ಬೆಳೆಗಳಿಗೆ ಹಾನಿ ಆಗಿದ್ದರೆ, ಅಂತಹ ರೈತರಿಗೆ ಪರಿಹಾರ ನೀಡಲು ಚಿಂತನೆ ನಡೆಸಲಾಗುವುದು ಎಂದೂ ಅವರು ಭರವಸೆ ನೀಡಿದರು.
ನಿರ್ವಹಣಾ ಮಂಡಳಿ ಬಗ್ಗೆ ಮುಖ್ಯಮಂತ್ರಿ ಸಂಪೂರ್ಣ ಅಧ್ಯಯನ ಮಾಡಿಕೊಂಡೇ ಹೋಗಿರುತ್ತಾರೆ. ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಭೆ ಇದ್ದ ಕಾರಣ ದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದೂ ಅವರು ಹೇಳಿದರು.
* ‘ಕಾವೇರಿ ನದಿ ನೀರಿನ ನಿರ್ವಹಣಾ ಮಂಡಳಿ ಬಗ್ಗೆ ಮುಖ್ಯಮಂತ್ರಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ’
-ಡಿ.ಕೆ.ಶಿವಕುಮಾರ್.