ಎರಡು ದಿನದೊಳಗೆ ವಿಚಾರಣೆ: ಜೆಡಿಎಸ್‌ ಮನವಿ

ಬೆಂಗಳೂರು: 2016ರ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ಸದಸ್ಯತ್ವ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎರಡು ದಿನದೊಳಗೆ ಇತ್ಯರ್ಥಗೊಳಿಸಬೇಕು ಎಂದು ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರಿಗೆ ಜೆಡಿಎಸ್‌ ಮನವಿ ಸಲ್ಲಿಸಿದೆ.

ಶಾಸಕರಾದ ಸಿ.ಎನ್‌.ಬಾಲಕೃಷ್ಣ ಮತ್ತು ಬಿ.ಬಿ.ನಿಂಗಯ್ಯ ಗುರುವಾರ ಸ್ಪೀಕರ್‌ ಅನುಪಸ್ಥಿತಿಯಲ್ಲಿ ಸಚಿವಾಲಯ ಕಾರ್ಯದರ್ಶಿ ಎಸ್‌.ಮೂರ್ತಿಯವರಿಗೆ ಪತ್ರ ನೀಡಿದರು. ಶುಕ್ರವಾರ ಅಥವಾ ಶನಿವಾರ ವಿಚಾರಣೆಗೆ ದಿನಾಂಕ ನಿಗದಿ ಮಾಡಬೇಕೆಂದು ಮನವಿ ಮಾಡಿದರು.

ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಶಾಸಕರಾದ ಎನ್‌. ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ, ಜಮೀರ್‌ ಅಹಮದ್‌ ಖಾನ್‌, ಎಚ್‌.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯಕ್‌ ಸದಸ್ಯತ್ವ ಅನರ್ಹಗೊಳಿಸಬೇಕು. ಈ ಸಂಬಂಧ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದಿದೆ. ಪದೇ ಪದೇ ಮನವಿ ಮಾಡಿದರೂ ಕ್ರಮ ಜರುಗಿಸಿಲ್ಲ ಎಂದು ಜೆಡಿಎಸ್‌ ತಿಳಿಸಿದೆ.

ಅನರ್ಹತೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳದೇ ಉದ್ದೇಶಪೂರ್ವಕವಾಗಿ ಮುಂದೂಡುತ್ತಿರುವುದರಿಂದ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುತ್ತದೆ. ಇದೇ 23ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಈ ಶಾಸಕರಿಗೆ ಅವಕಾಶ ನೀಡಬಾರದು ಎಂದು ಪಕ್ಷ ಹೇಳಿದೆ. ಎರಡು ದಿನಗಳಲ್ಲಿ ಸ್ಪೀಕರ್‌ ತೀರ್ಮಾನ ತೆಗೆದುಕೊಳ್ಳದಿದ್ದರೆ, ನ್ಯಾಯಾಲಯದ ಮೆಟ್ಟಿಲು ಹತ್ತುತ್ತೇವೆ ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದರು.

ಹೈಕೋರ್ಟ್‌ಗೆ: ‘ಜೆಡಿಎಸ್‌ನ ಏಳು ಬಂಡಾಯ ಶಾಸಕರ ಅನರ್ಹತೆ ಕೋರಿ ಹೈಕೋರ್ಟ್‌ಗೆ ಮೊರೆ ಹೋಗಲಾಗು
ವುದು’ ಎಂದು ಸಂಸದ ಎಚ್.ಡಿ.ದೇವೇಗೌಡ ಹಾಸನದಲ್ಲಿ ತಿಳಿಸಿದ್ದಾರೆ.

ಈಗ ರಾಜ್ಯಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ನಮ್ಮ ಮತ ಎಂದು ಭಿನ್ನಮತೀಯರು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ಗಮನ ಹರಿಸದೇ ಇದ್ದಾಗ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ ಎಂದು ಅವರು ಹೇಳಿದರು.

 

Back to Top